ಬೆಳಗಾವಿ : ಹಿಂಡಲಗಾ ಜೈಲಿನಲ್ಲಿ ಯಾರೆಲ್ಲಾ ಕುಖ್ಯಾತ ರೌಡಿಗಳಿದ್ದಾರೆ ಗೊತ್ತಾ….?
ಬೆಳಗಾವಿ : ಪರಪ್ಪನ ಅಗ್ರಹಾರ ಬಂಧಿಖಾನೆಯಲ್ಲಿ ನಟ ದರ್ಶನ್ಗೆ ವಿಶೇಷ ಸೌಲಭ್ಯ ನೀಡುತ್ತಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿದ್ದು ನಟ ದರ್ಶನ್ ನನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡುವ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ವೈಯಕ್ತಿಕ ವರ್ಚಸ್ಸು ಬಳಸಿಕೊಂಡು ವಿಲಾಸಿ ಜೀವನ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ಸರ್ಕಾರಕ್ಕೆ ಮುಜುಗರ ತರಿಸಿದ್ದು ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಿ ಕಾನೂನು ರೀತಿಯ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಜೈಲಿನಲ್ಲಿ ಯಾರೆಲ್ಲ ಇದ್ದಾರೆ…?
ದಶಕಗಳ ಇತಿಹಾಸ ಹೊಂದಿರುವ ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಸಧ್ಯ ಕುಖ್ಯಾತ ರೈಡಿಗಳನ್ನು ಬಂಧಿಸಲಾಗಿದೆ.
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಶಿಕ್ಷೆ ಅನುಭವಿಸುತ್ತಿರುವ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯೆ ಲಕ್ಷ್ಮೀ.
ಖ್ಯಾತ ಉದ್ಯಮಿ ಆರ್.ಎನ್ ನಾಯಕ ಕೊಲೆ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬನ್ನಂಜೆ ರಾಜಾ, ಕೇಂದ್ರ ಹೆದ್ದಾರಿ ಸಚಿವರಿಗೆ ಕೊಲೆ ಬೆದರಿಕೆ ಆರೋಪಿ ಹಾಗೂ ನಟೋರಿಯಸ್ ಗ್ಯಾಂಗ್ ಸ್ಟರ್ ಜಯೇಶ್ ಪೂಜಾರಿ, ಸೇರಿದಂತೆ 780 ಕ್ಕೂ ಅಧಿಕ ಖೈದಿಗಳು ಸೆರೆವಾಸ ಅನುಭವಿಸುತ್ತಿದ್ದಾರೆ.
ಹಿಂಡಲಗಾ ಕಾರಾಗೃಹ ಕುರಿತು ಮಾಹಿತಿ ಸಂಗ್ರಹ
ಬೆಳಗಾವಿ ಹಿಂಡಲಗಾ ಕಾರಾಗೃಹಕ್ಕೆ ನಟ ದರ್ಶನ್ ಸ್ಥಳಾಂತರ ಮಾಡುವ ಕುರಿತು ಹಿರಿಯ ಜೈಲು ಅಧಿಕಾರಿಗಳು ಚಿಂತನೆ ನಡೆಸಿದ್ದು ಈಗಾಗಲೇ ಹಿಂಡಲಗಾ ಕಾರಾಗೃಹದ ಮಾಹಿತಿ ಸಂಗ್ರಹ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಕೊಲೆ ಆರೋಪಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ಬೆಳಗಾವಿಗೆ ಸ್ಥಳಾಂತರ ಮಾಡಿದರೆ ಆಗುವ ಸಾಧಕ ಬಾಧಕಗಳ ಕುರಿತು ಅಧಿಕಾರಿಗಳು ಪರಾಮರ್ಶೆ ನಡೆಸಿದ್ದಾರೆ.
ಏನು ಹೇಳಿದ್ರು ಸಿಎಂ ಸಿದ್ದರಾಮಯ್ಯ : ಈ ಕುರಿತು ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು. ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ
ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಈ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ಇದಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದು, ಅವರ ವರದಿ ಆಧಾರದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು.
ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಕಾ ಬೇಡವೇ ಎಂಬ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದರು.


