ರಾಜಸ್ಥಾನದಲ್ಲಿ ಕುಳಿತು ಬೆಳಗಾವಿ ಎಸ್ಪಿ ಹೆಸರಲ್ಲಿ ವಂಚಿಸುತ್ತಿದ್ದ ಖದೀಮನ ಬಂಧನ
ಬೆಳಗಾವಿ : ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಖ್ಯಾತನಾಮರ ಹೆಸರಿನಲ್ಲಿ ಫೆಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಜನರನ್ನು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಖದೀಮನ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೆದ್, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಗದಗ ಎಸ್ಪಿ ನೆಮಗೌಡ ಸೇರಿದಂತೆ ಹಲವಾರು ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೆಸ್ಬುಕ್ ಖಾತೆ ತೆರೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ರಾಜಸ್ಥಾನ ಮೂಲದ ಆರೋಪಿಯನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು ತನಿಖೆ ಮುಂದುವರಿಸಿದ್ದಾರೆ.
ಸೈಬರ್ ವಂಚನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಅಧಿಕಾರಿಗಳಿಗೆ ಬಂಧಿತ ವ್ಯಕ್ತಿಯಿಂದ ರಾಜ್ಯದ ಹಲವಾರು ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ವಂಚನೆ ಮಾಡಿದ್ದು ಕಂಡುಬಂದಿದೆ. ಬಂಧಿತ ಆರೋಪಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೋರ್ವನ ಹೆಸರಿನಲ್ಲಿರುವ ಮೋಬೈಲ್ ನಂಬರ್ ಬಳಸಿಕೊಂಡು ಕೃತ್ಯ ಎಸಗಿದ್ದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್. ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಡುವುದಿಲ್ಲ. ಸರ್ಕಾರಿ ಸಂಬಳ ಪಡೆಯುವ ನಮಗೆ ಫೆಸ್ಬುಕ್ ಸ್ನೇಹಿತರ ಬಳಿ ಹಣ ಕೇಳುವ ಅವಶ್ಯಕತೆ ಬರುವುದಿಲ್ಲ. ಸಾರ್ವಜನಿಕರು ಈ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ಜೊತೆಗೆ ಸೈಬರ್ ವಂಚನೆ ಪ್ರಕರಣಗಳು ಕಂಡುಬಂದಿದ್ದೇ ಆದಲ್ಲಿ ತಕ್ಷಣ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದರು.


