ಸಂಭ್ರಮಾಚರಣೆ ನಡೆಯಬೇಕಿದ್ದ ಜಾಗದಲ್ಲಿ ಶೋಕಾಚರಣೆ
ಬೆಳಗಾವಿ : ಮಹಾತ್ಮ ಗಾಂಧಿಜಿ 1924 ರಲ್ಲಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಬೆಳಗಾವಿ ಕಾಂಗ್ರೆಸ್ ಅಧಿವೇಶ ನಡೆದು ನೂರು ವರ್ಷವಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಐತಿಹಾಸಿಕ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಮೊದಲ ದಿನ ಅನೇಕ ಕಾರ್ಯಕ್ರಮಗಳು ನಡೆದಿದ್ದವು. ಆದರೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನಲೆಯಲ್ಲಿ ಎರಡನೇ ದಿನದ ಕಾರ್ಯಕ್ರಮ ರದ್ದುಗೊಂಡಿವೆ.
ಡಿ. 26 ರ ಗುರುವಾರ ಹಲವು ಕಾರ್ಯಕ್ರಮ ಜರುಗಿದವು. ಮಧ್ಯಾಹ್ನ ವೀರಸೌಧದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಸಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ದೇಶದ ನೂರಾರು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
ಇಂದು ಶುಕ್ರವಾರ ಡಿ. 27 ರಂದು ಬೆಳಗಾವಿ ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಬೇಕಿತ್ತು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸುವರಿದ್ದರು. ಇನ್ನೂ ಮಧ್ಯಾಹ್ನ ನಗರದ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಆಯೋಜನೆ ಮಾಡಲಾಗಿತ್ತು. ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರಿಸಿ ಕಾರ್ಯಕ್ರಮ ಮಾಡುವ ತಯಾರಿ ನಡೆದಿತ್ತು.
ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಳೆದ ಹದಿನೈದು ದಿನಗಳಿಂದ ಕಾಂಗ್ರೆಸ್ ಕಾರ್ಯಕರ್ತರು ನಿರಂತರ ಪರಿಶ್ರಮ ಪಟ್ಟು ಆಯೋಜನೆ ಮಾಡಿದ್ದರು. ಮೈಸೂರು ದಸರಾ ಮೀರಿಸುವಂತೆ ಬೆಳಗಾವಿ ನಗರವನ್ನು ಸಿಂಗರಿಸಲಾಗಿತ್ತು. ಆದರೆ ಸಂಭ್ರಮಾಚರಣೆ ನಡೆಯಬೇಕಿದ್ದ ಜಾಗದಲ್ಲಿ ಶೋಕಾಚರಣೆ ನಡೆಯುತ್ತಿರುವುದು ವಿಪರ್ಯಾಸವೇ ಸರಿ.
ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಭಾರತಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರ. ಇವರ ನಿಧನದ ಹಿನ್ನಲೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ರದ್ದುಗೊಳಿಸಲಾಗಿದ್ದು ಮುಖ್ಯ ವೇದಿಕೆಯಲ್ಲಿ ಶೋಕಾಚರಣೆ ಕಾರ್ಯಕ್ರಮ ನಡೆಯುತ್ತಿದೆ.


