ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಐನಾತಿ ಕಳ್ಳರ ಬಂಧನ
ಬೆಳಗಾವಿ : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದು ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೇಂದ್ರ ಬಸ್ ನಿಲ್ದಾಣದಲ್ಲಿ ಬಂಗಾರದ ಆಭರಣ ಕಳ್ಳತನ ಕುರಿತು ಕಳೆದ ವರ್ಷ ಜುಲೈ 18 ರಂದು ಪುಂಡಲೀಕ ಎಂಬುವವರು ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬೆನ್ನಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿರುವ ಪೊಲೀಸರು ಆರೋಪಿಗಳಿಂದ 9 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬಂಧಿತರು ಮಹಾರಾಷ್ಟ್ರ ಮೂಲದ ಪ್ರಕಾಶ ಜಾಧವ್ (46), ಕಾಳಿದಾಸ ಬರಡೆ (27). ಇಬ್ಬರು ಆರೋಪಿಗಳಿಂದ 95 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಮಾರ್ಕೆಟ್ ಠಾಣೆ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


