ಬೆಂಗಳೂರು : ರಾಜಧಾನಿಯಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಚಾಮರಾಜಪೇಟೆಯ ಸಿಎಆರ್ (CAR) ಮೈದಾನದಲ್ಲಿ ನಡೆದ ಈ ಟ್ರ್ಯಾಪ್ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ ನಡೆಸಿದ ಘಟನೆ ನಡೆದಿದೆ. ರಂಪಾಟ ನಡೆಸಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಈ ಪ್ರಕರಣವು ಹಣ ಹೂಡಿಕೆಗೆ ಸಂಬಂಧಿಸಿದ ವಂಚನೆ ಪ್ರಕರಣದಿಂದ ಆರಂಭವಾಗಿದೆ. ಧನರಾಜ್ ಎಂಬುವವರು ಕೆ.ಪಿ.ಅಗ್ರಹಾರ ಠಾಣೆಗೆ ದೂರು ನೀಡಿದ್ದರು. ಹಣ ಹೂಡಿಕೆ ಮಾಡಿದರೆ ಲಾಭ ಬರುತ್ತದೆ ಎಂದು ನಂಬಿಸಿ ಸೂರಜ್,

ಸುಜನ್ ಮತ್ತು ಶ್ರೀನಿವಾಸ್ ಎಂಬುವವರು ಧನರಾಜ್‌ ಅವರಿಂದ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದರು. ಹಣ ವಾಪಸ್ ಕೇಳಿದಾಗ ಆರೋಪಿಗಳು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಸಂಬಂಧ ಜನವರಿ 22 ರಂದು ಕೆ.ಪಿ. ಅಗ್ರಹಾರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸೂರಜ್ ಮತ್ತು ಸುಜನ್ ಮನೆಗೆ ಇನ್ಸ್‌ಪೆಕ್ಟರ್ ಗೋವಿಂದರಾಜು ನೇತೃತ್ವದ ತಂಡ ತೆರಳಿತ್ತು. ಈ ವೇಳೆ ಪೊಲೀಸರು ಮತ್ತು ಆರೋಪಿಗಳ ನಡುವೆ ಗಲಾಟೆ ನಡೆದಿತ್ತು.

ಬಳಿಕ ಠಾಣೆಯಲ್ಲಿ ಪ್ರಕರಣವನ್ನು ಡೀಲ್ ಮಾಡಲು ಮುಂದಾದ ಇನ್ಸ್‌ಪೆಕ್ಟರ್ ಗೋವಿಂದರಾಜು, ಬಡ್ಸ್ ಕಾಯ್ದೆಯಡಿ ದಾಖಲಾಗಿರುವ ಕೇಸ್‌ನಿಂದ ಬಿಡಿಸಲು ಮತ್ತು ಬಂಧಿಸದಿರಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.