ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ : ಜಿ.ಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ : ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಅಂಕಗಳನ್ನು ಗಳಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಶುಭಹಾರೈಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ವರ್ಷಾನುಪೂರ್ತಿ ಎಲ್ಲ ವಿಷಯಗಳನ್ನು ತರಗತಿಗಳಲ್ಲಿ ಕಲಿತು, ಸಾಕಷ್ಟು ಅಧ್ಯಯನ ಮಾಡಿ ಪರೀಕ್ಷೆ ಬರೆಯಲು ಸಿದ್ಧರಾಗಿದ್ದೀರಿ. ಹೀಗಾಗಿ, ಯಾವುದೇ ಭಯ ಹಾಗೂ ಒತ್ತಡಕ್ಕೆ ಒಳಗಾಗದೇ ಧೈರ್ಯವಾಗಿ ಪರೀಕ್ಷೆ ಎದುರಿಸಿ. ಶಾಂತ ರೀತಿಯಿಂದ ಪ್ರಶ್ನೆಪತ್ರಿಕೆಯನ್ನು ಓದಿ, ಅರ್ಥೈಸಿಕೊಂಡು ಪ್ರಶ್ನೆಗಳಿಗೆ ಉತ್ತರ ಬರೆಯಿರಿ. ನಿಗದಿತ ಅವಧಿಯೊಳಗೆ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿ ಎಂದು ಸಲಹೆ ನೀಡಿದ್ದಾರೆ.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆಗಳು ಜರುಗಲು ಎಲ್ಲ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಹೀಗಾಗಿ, ಪಾಲಕರು ಹಾಗೂ ಉಪನ್ಯಾಸಕರು ಕೂಡ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ತಾಲೂಕಾವಾರು ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗಳನ್ನು ಜಿಲ್ಲಾ ಪಂಚಾಯತ ವತಿಯಿಂದ ಪುರಸ್ಕರಿಸಲಾಗುವುದು ಹಾಗೂ ಶೈಕ್ಷಣಿಕ ಪ್ರವಾಸಕ್ಕೆ ಕಳುಹಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಜೊತೆಗೆ ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ ಕೀರ್ತಿ ತರಬೇಕು. ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಶುಭಹಾರೈಸಿದ್ದಾರೆ.


