ಹಾರೂಗೇರಿ – ಓಡೋಡಿ ಬಂದು ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದ ಮಹಿಳೆ…! VIDEO
ರಾಯಬಾಗ : ಮೃತ ಯೋಧನ ಪಾರ್ಥಿವ ಶರೀರವನ್ನು ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ಹುಟ್ಟೂರಿಗೆ ತರುವ ವೇಳೆ ಮಹಿಳೆಯೊಬ್ಬರು ಓಡೋಡಿ ಬಂದು ಅಂತಿಮ ನಮನ ಸಲ್ಲಿಸಿದ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಕಂಡುಬಂತು.
ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ವೀರ ಯೋಧ ಬಸವರಾಜ ವಾಳಕೆ ಅವರು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಸಂಭವಿಸಿದ ಈ ದುರ್ಘಟನೆ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಿಸಿತ್ತು.
ಶುಕ್ರವಾರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸಿದಾಗ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗಿದ್ದು, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಹೂವಿನ ಮಳೆ ಸುರಿಸಿ ಗೌರವ ಸಲ್ಲಿಸಿದರು. ಸಾವಿರಾರು ಜನರು ಅಂತಿಮ ದರ್ಶನ ಪಡೆದರು.
ಮೂರು ಸುತ್ತು ಗುಂಡು ಹಾರಿಸಿ ಯೋಧನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಪೊಲೀಸ್ ಭದ್ರತೆಯಲ್ಲಿ ಅಂತ್ಯಕ್ರಿಯೆ ನಡೆದಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಮಾಜಿ ಮತ್ತು ಹಾಲಿ ಸೈನಿಕರು ಭಾಗವಹಿಸಿದರು.


