ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ; ಪ್ರಧಾನಿ ಮೋದಿ ಕಠಿಣ ವ್ರತ
ನವದೆಹಲಿ : ಬರುವ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ ಸಮಾರಂಭದ ಹಿನ್ನೆಲೆ 11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮೋದಿ. ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕೇವಲ 11 ದಿನಗಳು ಉಳಿದಿವೆ. ಈ ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಕೇಳಿದ್ದಾನೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು ಇಂದಿನಿಂದ 11 ದಿನಗಳ ವಿಶೇಷ ಆಚರಣೆಯನ್ನು ಪ್ರಾರಂಭಿಸುತ್ತಿದ್ದೇನೆ.
ಆ ಆಚರಣೆ ಹಿನ್ನಲೆಯಲ್ಲಿ ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ. ಈ ಕ್ಷಣದಲ್ಲಿ ನನ್ನ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ತುಂಬಾ ಕಷ್ಟ, ಆದರೆ ನಾನು ನನ್ನ ಕಡೆಯಿಂದ ಪ್ರಯತ್ನಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣ ಸಂದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಹಿಂದೂ ಶಾಸ್ತ್ರಗಳ ಪ್ರಕಾರ, ದೇವರ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ಒಂದು ವಿವರವಾದ ಆಚರಣೆಯಾಗಿದೆ. ಇದಕ್ಕೂ ಮುನ್ನ ಸಾಕಷ್ಟು ನಿಯಮಗಳನ್ನು ಅನುರಿಸಬೇಕಾಗುತ್ತದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಹಲವು ಜವಾಬ್ದಾರಿಗಳ ನಡುವೆಯೂ ಎಲ್ಲಾ ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ. ಅದರ ಫಲವಾಗಿ 11 ದಿನಗಳ ವ್ರತಕ್ಕೆ ಇಂದು ಕೈ ಹಾಕಿದ್ದಾರೆ


