ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ; 27 ಪಿಡಿಒಗಳ ಅಮಾನತು
ರಾಯಚೂರು : ನರೇಗಾ ಯೋಜನೆ ಅಡಿಯಲ್ಲಿ ಕೋಟ್ಯಾಂತರ ರೂ. ಭ್ರಷ್ಟಾಚಾರ ಮಾಡಿದ್ದ ಆರೋಪದಲ್ಲಿ 27 ಪಿಡಿಒಗಳನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತಿ ಸಿಇಒ ಆದೇಶ ಹೊರಡಿಸಿದ್ದಾರೆ.
ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಮಾರು 150 ಕೋಟಿ ರೂ. ಅಧಿಕ ಭ್ರಷ್ಟಾಚಾರ ನಡೆದಿದ್ದು ಬೆಳಕಿಗೆ ಬಂದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಪಾಂಡ್ವೆ 27 ಪಿಡಿಒಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಶರಣಗೌಡ ಭಯ್ಯಾಪುರ ಅವರು 2022 ರಲ್ಲಿ ಜಿಲ್ಲಾ ಪಂಚಾಯತಿ ಸಿಇಒ ಅವರಿಗೆ ದೂರು ನೀಡಿದ್ದರು. ಇದಕ್ಕೆ ಯಾವುದೇ ಪ್ರತಿಕ್ರಿಯೆ ಬರದ ಕಾರಣ ನೇರವಾಗಿ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.
ನಂತರ ರಾಜ್ಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಮೀತಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಸಮೀತಿ 2021 – 22 ರಲ್ಲಿ ಕೆಲಸ ನಿರ್ವಹಿಸಿರುವ ಜಿಲ್ಲಾ ಪಂಚಾಯತಿ ಸಿಇಒ, ಉಪ ಕಾರ್ಯದರ್ಶಿ, ಯೋಜನಾ ನಿರ್ದೇಶಕ ಹಾಗೂ ತಾಂತ್ರಿಕ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಪಾರಸ್ಸು ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 35 ಪಿಡಿಒಗಳನ್ನು ಅಮಾನತು ಮಾಡಲಾಗಿದೆ. ಭ್ರಷ್ಟಾಚಾರ ನಡೆದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿ ಬೇರೆಡೆ ವರ್ಗಾವಣೆ ಆದ ಪಿಡಿಒಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.


