ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ; ಟಿಎಂಸಿ ನಾಯಕಿ ಮಮತಾ ಔಟ್..?
ನವದೆಹಲಿ : ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂಡಿಯಾ ಮೈತ್ರಿಕೂಟಕ್ಕೆ ಸಂಕಷ್ಟ ಎದುರಾಗುತ್ತಿದ್ದು, ಟಿಎಂಸಿ ಅಧಿನಾಯಕಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ( Mamata banerjee) ದೊಡ್ಡ ಆಘಾತ ನೀಡಿದ್ದಾರೆ. ಪಶ್ಚಿಮ ಬಂಗಾಳದ ಎಲ್ಲ 42 ಲೋಕಸಭೆ ಕ್ಷೇತ್ರದಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ಅವರು ಘೋಷಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಟಿಎಂಸಿ ನಡುವೆ ಮೊದಲಿನಿಂದಲೂ ತಿಕ್ಕಾಟ ಇತ್ತು.
ಕಾಂಗ್ರೆಸ್ಗೆ ಕೇವಲ ಎರಡು ಸ್ಥಾನಗಳನ್ನು ಮಾತ್ರ ಬಿಟ್ಟು ಕೊಡುವುದಾಗಿ ಮಮತಾ ಹೇಳಿದ್ದರು. ಆದರೆ, ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಆ ಎರಡು ಸ್ಥಾನಗಳನ್ನೂ ಸಹ ನೀಡದಿರಲು ಟಿಎಂಸಿ ನಿರ್ಧರಿಸಿದೆ.
ಇಂದು ಈ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ, “ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ದೇಶದಲ್ಲಿ ಏನು ಮಾಡಲಾಗುವುದು ಎಂಬುದರ ಬಗ್ಗೆ ನನಗೆ ಕಾಳಜಿ ಇಲ್ಲ. ಆದರೆ, ಪಶ್ಚಿಮ ಬಂಗಾಳದಲ್ಲಿ ನಮ್ಮದು ಜಾತ್ಯತೀತ ಪಕ್ಷ.
ಪಶ್ಚಿಮ ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಭಾರತ ಮೈತ್ರಿಕೂಟದ ಭಾಗವಾಗಿದ್ದೇನೆ. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ನಮ್ಮ ರಾಜ್ಯದಲ್ಲಿ ಹಾದು ಹೋಗುತ್ತಿದೆ. ಆದರೆ, ಅದರ ಬಗ್ಗೆ ನಮಗೆ ತಿಳಿಸಲಾಗಿಲ್ಲ ಎಂದಿದ್ದಾರೆ.
ಇನ್ನು ಟಿಕೆಟ್ ಹಂಚಿಕೆ ವಿಚಾರದಲ್ಲಿ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಹೆಚ್ಚಿದೆ. ಇತ್ತ ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಹೆಚ್ಚು ಸ್ಥಾನ ನೀಡಲು ಶಿವಸೇನಾ ಉದ್ಧವ್ ಠಾಕ್ರೆ ಬಣದ ಪಕ್ಷ ನಿರಾಕರಿಸಿದೆ. ಕಾಂಗ್ರೆಸ್ ಇಲ್ಲಿ ಶೂನ್ಯದಿಂದ ಪ್ರಾರಂಭವಾಗಬೇಕಿದೆ ಎಂದು ಹೇಳುವ ಮೂಲಕ ಅಧಿಕ ಸ್ಥಾನಗಳನ್ನು ನೀಡದಿರುವ ಸೂಚನೆ ನೀಡಿದ್ದಾರೆ.


