ಅಧಿಕಾರಕ್ಕೆ ಬಂದರೆ ಭಜರಂಗದಳ ನಿಷೇಧ : ಕಾಂಗ್ರೆಸ್ ವಿರುದ್ಧ ಆಂಜನೇಯ ಭಕ್ತರ ಆಕ್ರೋಶ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಭಜರಂಗದಳ ಸಂಘಟನೆ ನಿಷೇಧ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದೇ ತಡ, ರಾಜ್ಯದಲ್ಲಿ ಹಿಂದೂ ಪರ ಯುವಕರು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಇಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಲ್ಲಿ ಪ್ರಮುಖವಾಗಿ ಎರಡು ಘೋಷಣೆಗಳು ಹಿಂದೂ ಸಮುದಾಯ ಆಕ್ರೋಶ ಹೊಂದುವಂತೆ ಮಾಡಿದೆ. ಅಧಿಕಾರಕ್ಕೆ ಬಂದರೆ ಹಿಂದೂಗಳ ಅಸ್ಮಿತೆಯಾದ ಭಜರಂಗದಳ ಬ್ಯಾನ್ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.
ಇನ್ನೂ ಕಾಂಗ್ರೆಸ್ ನಡೆಗೆ ಬಿಜೆಪಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ತಾಕತ್ತಿದ್ದರೆ ಭಜರಂಗದಳ ಬ್ಯಾನ್ ಮಾಡಿ ಎಂದು ಸವಾಲು ಹಾಕಿದೆ. ಇನ್ನೂ ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಎಡವಟ್ಟು ಮಾಡಿಕೊಂಡಿದೆ.


