ಬೆಳಗಾವಿ : ಘಟಪ್ರಭಾ ಪ್ರವಾಹ ಪೀಡಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೊಸ ಲೋಳಸೂರ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.

ಗೋಕಾಕ್ ಪಟ್ಟಣದ ಸಮೀಪ ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.


ಪ್ರತಿ ವರ್ಷ ಮಳೆಯಿಂದಾಗಿ ಜುಗುಳ ಹಾಗೂ ಮಂಗಾವತಿ ಗ್ರಾಮಗಳು ಪ್ರವಾಹಕ್ಕೆ ತುತ್ತಿಗುತ್ತಿರುವ ಹಿನ್ನಲೆಯಲ್ಲಿ ಈ ಗ್ರಾಮಗಳ‌ ಖಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿಧಿಗಳೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.

ಸೋಮವಾರ ಕೃಷ್ಣಾ ಹಾಗೂ ಘಟಪ್ರಭಾ ನದಿ ಪ್ರವಾಹಕ್ಕೆ ಒಳಗಾದ ಗೋಕಾಕ್ ಹಾಗೂ ಚಿಕ್ಕೋಡಿ ಉಪ ವಿಭಾಗದ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಮಾತನಾಡಿದ ಇವರು. ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮಳೆ‌ ಜಾಸ್ತಿಯಾದಾಗ ಪ್ರವಾಹ ಬಂದಾಗ ಇಂತಹ ಪರಿಸ್ಥಿತಿಗಳು ಉದ್ಭವವಾಗುತ್ತವೆ ಈ ಕುರಿತು ಶೀಘ್ರ ತೀರ್ಮಾನ ಕೈಗೊಳ್ಳಲಾಗುವದು.ಕಷ್ಟದಲ್ಲಿರುವವರಿಗೆ ನಮ್ಮ ಸರ್ಕಾರದಿಂದ ಕೂಡಲೇ ಪರಿಹಾರ ನೀಡುವ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಯಾರೂ ಕೂಡ ಆತಂಕ ಪಡಬಾರದು ಎಂದು ಹೇಳುವ ಮೂಲಕ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಿದರು.

ಬೆಳೆಹಾನಿ ಕುರಿತಂತೆ ಸಮೀಕ್ಷೆ‌ ಜರುಗಿಸಿ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳನ್ವಯ ಪರಿಹಾರ ವಿತರಿಸಲು ಕ್ರಮ ಜರುಗಿಸಲಾಗುವುದು ಎಂದು‌ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ತಿಳಿಸಿದರು.