ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್
ಬೆಂಗಳೂರು : ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಕುರಿತು ಆಡಿದ್ದ ಅವಹೇಳನಕಾರಿ ಹೇಳಿಕೆ ಕುರಿತು ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ.
ಹಿಂದೂ ಧರ್ಮಕ್ಕೆ ನಿಂದನೆ ಮಾಡುವ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.
ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
2022ರ ನವೆಂಬರ್ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜಾರಕಿಹೊಳಿ, ‘ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ’ ಎಂದಿದ್ದರು.
ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ. ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಭಾರತಕ್ಕೂ, ಪರ್ಷಿಯನ್ಗೂ ಏನು ಸಂಬಂಧ. ಹಿಂದೂ ಪದ ಹೇಗೆ ನಮ್ಮದಾಯಿತು ಎಂಬ ಬಗ್ಗೆ ಚರ್ಚೆಯಾಗಬೇಕಿದೆ’ ಎಂದು ಹೇಳಿಕೆ ನೀಡಿದ್ದರು.


