ಬೆಳಗಾವಿ ಅಧಿವೇಶನ ದಿನಾಂಕ ಘೋಷಣೆ ; ಪ್ರತಿಭಟನೆಗೆ ಸಜ್ಜಾದ ಮಂಡ್ಯ ರೈತರು…!
ಬೆಂಗಳೂರು : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಕೊನೆಗೂ ಸರ್ಕಾರ ದಿನಾಂಕ ನಿಗದಿ ಮಾಡಿದೆ.
ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನ ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಅಂತಿಮ ದಿನಾಂಕ ನಿಗದಿಯಾಗುತ್ತಿದ್ದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಸಜ್ಜಾಗುತ್ತಿದ್ದಾರೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ.
ಪ್ರತಿಭಟನೆಯಲ್ಲಿ ಮಂಡ್ಯದಿಂದ 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಸಂಸ್ಥಾಪಕ ಅಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ತಿಳಿಸಿದ್ದಾರೆ.