ಈ ಸಾವು ನ್ಯಾಯವೇ…? ; ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ
ಬೆಳಗಾವಿ : ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವಣಪ್ಪಿರುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಬಾಣಂತಿ ಕಲ್ಪನಾ ರಾಠೋಡ ಮೃತ ಮಹಿಳೆ. ನಿನ್ನೆ ರಾತ್ರಿ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ತಾಯಿ ಮಗು ಆರೋಗ್ಯವಾಗಿದ್ದಾರೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದರು.
ಆದರೆ ಮಂಗಳವಾರ ಬೆಳಿಗ್ಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆಗಿದೆ ಎಂದು ಹೇಳಿ ನಂತರ ಬಾಣಂತಿ ಮೃತಪಟ್ಟಿದ್ದಾಗಿ ವೈದ್ಯರು ಹೇಳಿಕೆ ನೀಡಿದ್ದಾರೆ. ಇದರಿಂದ ಮನನೊಂದ ಮಹಿಳೆ ಕುಟುಂಬದವರು ಆಕ್ರೋಶ ಹೊರಹಾಕುತ್ತಿದ್ದಾರೆ.
ಆರೋಗ್ಯ ಹದಗೆಟ್ಟಿದ್ದರೆ ಬೇರೆ ಆಸ್ಪತ್ರೆಗೆ ರವಾನಿಸಲು ಅವಕಾಶ ಕೊಡಿ ಎಂದು ಮಹಿಳೆ ಕುಟುಂಬದವರು ಕೇಳಿಕೊಂಡರು ಬಿಮ್ಸ್ ವೈದ್ಯರು ಯಾವುದೇ ಸ್ಪಂದನೆ ನೀಡಿಲ್ಲ ಎಂಬುದು ಕುಟುಂಬದವರ ವಾದವಾಗಿದೆ. ತಮ್ಮ ಮಗಳ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆಕ್ರೋಶ ಹೊರಹಾಕಿ ಆಸ್ಪತ್ರೆ ಆವರಣದಲ್ಲಿ ಸಂಬಂಧಿಕರು ಪ್ರತಿಭಟನೆ ಮಾಡುತ್ತಿದ್ದಾರೆ.


