30 ವರ್ಷದ ಹಿಂದೆ 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಿಗನಿಗೆ ಜೈಲು ಶಿಕ್ಷೆ…ಈತನ ವಯಸ್ಸು ಎಷ್ಟುಗೊತ್ತಾ…?
ಬೆಳಗಾವಿ : 30 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು 500 ರೂ. ಲಂಚ ಪಡೆದಿದ್ದ ಮಾಜಿ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆಯಾಗಿದೆ.
1995ರಲ್ಲಿ ಕಡೋಲಿ ರೈತ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಅವರು ತಮ್ಮ ಸಹೋದರನೊಂದಿಗೆ ಜಮೀನು ಹಂಚಿಕೆ (ವಾಟ್ನಿ) ಮಾಡಿ ಉತಾರ ಕೊಡಲು ಅರ್ಜಿ ಸಲ್ಲಿಸಿದ್ದರು. ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಮಾಜಿ ಗ್ರಾಮ ಲೆಕ್ಕಾಧಿಕಾರಿ ನಾಗೇಶ್ ಡೊಂಡು ಶಿವಂಗೆಕರ್ ಎಂಬಾತ
500 ರು. ಲಂಚ ಕೇಳಿದ್ದರು.
ಇದನ್ನು ರೈತ ಲೋಕಾಯುಕ್ತ ಅಧಿಕಾರಿಗಳಿಗೆ ತಿಳಿಸಿದ್ದರು. ಜಾಲ ಬೀಸಿದ ಅಧಿಕಾರಿಗಳು ಲಂಚ ಪಡೆಯುವಾಗ ಬಂಧಿಸಿದ್ದರು. ಆಗಿನ ಬೆಳಗಾವಿ ಜಿಲ್ಲಾ ಲೋಕಾಯುಕ್ತ ಉಪ ಅಧೀಕ್ಷಕ ಎಂ.ಎಸ್. ದಂಡಿನ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು.
ವಿಶೇಷ ನ್ಯಾಯಾಲಯವು 2006 ರ ಜೂನ್ 14 ರಂದು ನಾಗೇಶಗೆ ಒಂದು ವರ್ಷ ಕಠಿಣ ಶಿಕ್ಷೆ ಹಾಗೂ 1,000 ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ನಾಗೇಶ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. 2012ರ ಮಾರ್ಚ್ 9ರಂದು ಹೈಕೋರ್ಟ್, ನಾಗೇಶ ನಿರಪರಾಧಿ ಎಂದು ತೀರ್ಪು ನೀಡಿತ್ತು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಲೋಕಾಯುಕ್ತ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೇ ಏಪ್ರಿಲ್ 16ರಂದು ಸುಪ್ರೀಂಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತು. ಅಲ್ಲದೇ ಬೆಳಗಾವಿ ವಿಶೇಷ ನ್ಯಾಯಾಲಯ ನೀಡಿದ ಆದೇಶವನ್ನು ಎತ್ತಿ ಹಿಡಿದಿದೆ.
ಆಪಾದಿತನ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಆದೇಶದಂತೆ ಬುಧವಾರ ಬಂಧಿಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು 10 ವರ್ಷಗಳ ಹಿಂದೆ ಸೇವೆಯಿಂದ ನಿವೃತ್ತರಾದ 70 ವರ್ಷದ ನಾಗೇಶ್ ದೊಂಡು ಶಿವಂಗೇಕರ್ ಅವರನ್ನು ಬಂಧಿಸಿದರು.
ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಸದ್ಯ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


