ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ ; ಇಬ್ಬರ ಅಮಾನತು
ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ವಿಷಾಹಾರ ಸೇವಿಸಿ 119 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಹಿರೇಕೋಡಿ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯಪಾಲಕ ಶಿವಪ್ಪ ಡುಕರೆ ಹಾಗೂ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಲತಾ ಎಂಬುವವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಶುಕ್ರವಾರ ವಸತಿ ಶಾಲೆಯ ಮಕ್ಕಳಿಗೆ ಬೆಳಗಿನ ಉಪಹಾರಕ್ಕೆಂದು ಉಪ್ಪಿಟ್ಟು ಹಾಗೂ ಚಹಾ ವಿತರಣೆ ಮಾಡಲಾಗಿತ್ತು. ಇದನ್ನು ಸೇವಿಸಿದ್ದ 77 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿರುವ 10 ನೇ ತರಗತಿ ವಿದ್ಯಾರ್ಥಿನಿ ರಾಜಮಾ ದಾದನ್ನವರ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಪಹಾರ ಸೇವಿಸಿ ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ : ಜಿಪಂ ಸಿಇಒ ರಾಹುಲ್ ಶಿಂಧೆ
ಬೆಳಗಾವಿ : ಜಿಪಂ ಸಿಇಒ ರಾಹುಲ್ ಶಿಂಧೆ ರವರು ಬೆಳಗಾವಿಯ ಬಿಮ್ಸ್ ಜಿಲ್ಲಾ ಆಸ್ಪತ್ರೆಗೆ ಭೇಟಿ ಕೊಟ್ಟು ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಸ್ವಸ್ಥಗೊಂಡ ಮಕ್ಕಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸದರಿ ಸಮಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಅಧಿಕಾರಿಗಳು ಬೆಳಗಾವಿ, ಬಿಮ್ಸ್ ಜಿಲ್ಲಾಆಸ್ಪತ್ರೆಯ ಜಿಲ್ಲಾಶಸ್ತ್ರ ಚಿಕಿತ್ಸಕರು ಹಾಗೂ ಆಸ್ಪತ್ರೆ ಸ್ಥಳಿಯ ವೈದ್ಯಾಧಿಕಾರಿಗಳು ಮತ್ತು ಚಿಕ್ಕ ಮಕ್ಕಳ ತಜ್ಞರು ಉಪಸ್ಥಿತರಿದ್ದು ಸದರಿ ವೈದ್ಯಾಧಿಕಾರಿಗಳಿಗೆ ಶಾಲೆಯಲ್ಲಿ ಉಪಹಾರ ಸೇವಿಸಿ ಅಸ್ವಸ್ಥಗೊಂಡ ಮಕ್ಕಳಿಗೆ ಸೂಕ್ತವಾದ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
ತದನಂತರ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಸಾರ್ವಜನಿಕ ಆಸ್ಪತ್ರೆ ಚಿಕ್ಕೋಡಿಗೆ ಭೇಟಿ ನೀಡಿ ಉಪಹಾರ ಸೇವಿಸಿ ಅಸ್ವಸ್ಥಗೊಂಡು ದಾಖಲಾದ ಮಕ್ಕಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಉಪಸ್ಥಿತರಿದ್ದ ಎಲ್ಲ ವೈದ್ಯಾಧಿಕಾರಿಗಳಿಗೆ ಶಾಲೆಯಲ್ಲಿ ಅಸ್ವಸ್ಥಗೊಂಡ ಮಕ್ಕಳಿಗೆ ಸೂಕ್ತವಾದ ಚಿಕಿತ್ಸೆ ನೀಡಲು ಬೇಕಾಗುವ ಔಷಧೋಪಚಾರ ಲಭ್ಯವಿರುವ ಬಗ್ಗೆ ವಿಚಾರಿಸಿದರು ಮತ್ತು ಸದರಿ ಆಸ್ಪತ್ರೆಯಲ್ಲಿ ದಾಖಲಾದ ಎಲ್ಲ ಮಕ್ಕಳು ಬೇಗನೆ ಗುಣಮುಖರಾಗುವಂತೆ ಸಲಹೆ ಸೂಚನೆಗಳನ್ನು ನೀಡಿ ಚಿಕಿತ್ಸೆಯಲ್ಲಿ ಲೋಪದೋಶವಾಗದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಹಿರೇಕೊಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಅಸ್ವಸ್ಥತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಹಾಗೂ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ತಿಳಿಸಿದರು.
ಚಿಕ್ಕೋಡಿ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳ ಸೇವಿಸಿದ ಆಹಾರ ಹಾಗೂ ನೀರಿನ ಮಾದರಿಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ. ಈ ಮಾದರಿಗಳ ವರದಿ ಬಂದ ಬಳಿಕ ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಕ್ಕಳ ಪೋಷಕರಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಬೇಕು. ಜತೆಗೆ ಆರೋಗ್ಯ ಸುಧಾರಣೆ ಕಂಡ ಮಕ್ಕಳನ್ನು ಮನೆಗೆ ಕಳುಹಿಸಲು ವಾಹನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೂರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಡುಗೆ ಸಿಬ್ಬಂದಿ ಜೊತೆಗೆ ಚರ್ಚಿಸಿ ಭೋಜನಾಲಯ, ಕುಡಿಯುವ ನೀರು ಮತ್ತು ವಸತಿ ವ್ಯವಸ್ಥೆ ಕುರಿತು ಪರಿಶೀಲನೆ ಮಾಡಿದರು.
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರದಂದು ಬೆಳಗಿನ ಉಪಹಾರ ಸೇವಿಸಿದ ನಂತರ ಶಾಲೆಯಲ್ಲಿರುವ ಒಟ್ಟು 119 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರಗೆ ದಾಖಲಾಗಿದ್ದು, ಅಲ್ಪಸಂಖ್ಯಾತರ ಇಲಾಖೆಗೆ ಸೇರಿದ ಈ ವಸತಿ ಶಾಲೆಯಲ್ಲಿ ಪ್ರತಿ ದಿನದಂತೆ ಬೆಳಗಿನ ಉಪಹಾರಕ್ಕೆ ಉಪ್ಪಿಟ್ಟು ಸೇವಿಸಿದ ನಂತರ ಕೆಲವು ಮಕ್ಕಳಲ್ಲಿ ಹೊಟ್ಟೆನೋವು, ವಾಂತಿ ಲಕ್ಷಣಗಳು ಕಂಡು ಬಂದಿದ್ದು ತಕ್ಷಣ ಸದರಿ ಎಲ್ಲ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆ ಚಿಕ್ಕೋಡಿಯಲ್ಲಿ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿಯವರೆಗೆ ಸಾರ್ವಜನಿಕ ಆಸ್ಪತ್ರೆ ಚಿಕ್ಕೋಡಿಯಲ್ಲಿ 35 ಮಕ್ಕಳು ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಚಿಕ್ಕೋಡಿಯಲಿ 21 ಮಕ್ಕಳು ಮತ್ತು ಜಿಲ್ಲಾಆಸ್ಪತ್ರೆ ಬಿಮ್ಸ್ನಲ್ಲಿ 15 ಮಕ್ಕಳು ದಾಖಲಾಗಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಒಟ್ಟು 119 ಅಸ್ವಸ್ಥಗೊಂಡ ಮಕ್ಕಳಲ್ಲಿ 40 ಮಕ್ಕಳು ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸಚಾರ್ಜ್ ಹೊಂದಿರುತ್ತಾರೆ. ಇನ್ನುಳಿದ 53 ಮಕ್ಕಳ ಆರೋಗ್ಯವು ಸ್ಥಿರವಾಗಿದ್ದುಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.
ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ, ಡಿಹೆಚ್ಒ ಡಾ.ಈಶ್ವರಪ್ಪಾ ಗಡಾದ, ಜಿಲ್ಲಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಎಫ್ ಯೂ ಪೋಜೇರಿ, ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವ, ತಾಪಂ ಇಒ ಕೆ.ಎನ್.ವಣ್ಣೂರ, ಡಿವೈಎಸ್ ಪಿ ಗೋಪಾಲಕೃಷ್ಣ ಗೌಡರ, , ತಹಶೀಲ್ದಾರ ರಾಜೇಶ್ ಬುರ್ಲಿ, ಎಡಿಹೆಚ್ಒ ಚಿಕ್ಕೋಡಿ ಡಾ.ಎಸ್ ಎಸ್ ಗಡೇದ, ಟಿಹೆಚ್ಒ ಡಾ.ಸುಕಮಾರ ಬಾಗಾಯಿ, ಬೆಳಗಾವಿ ಜಿಲ್ಲೆಯ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ತಾಪಂ ಸಹಾಯಕ ನಿರ್ದೇಶಕರಾದ ಶಿವಾನಂದ ಶಿರಗಾಂವೆ, ಎಸ್.ಎಸ್.ಮಠದ ಮತ್ತಿತರರು ಉಪಸ್ಥಿತರಿದ್ದರು.


