ಬೆಳಗಾವಿ ಜಿಲ್ಲಾಧಿಕಾರಿ ವಿರುದ್ದ ಲೋಕಸಭೆ ಸ್ಪೀಕರಗೆ ದೂರು
ಬೆಳಗಾವಿ : ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ವಿರುದ್ಧ ಹಕ್ಕು ಉಲ್ಲಂಘನೆ ಪ್ರಕರಣ ದಾಖಲಿಸುವಂತೆ ಮಹಾರಾಷ್ಟ್ರದ ಹಾಥಕಣಗಲೆ ಕ್ಷೇತ್ರದ ಸಂಸದ ಧೈರ್ಯಶೀಲ್ ಮಾನೆ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಓಂ ಬಿರ್ಲಾ ಅವರನ್ನು ಭೇಟಿ ಮಾಡಿರುವ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಈ ಬಗ್ಗೆ ಮನವಿ ಸಲ್ಲಿಸಿ, ಮರಾಠಿಗರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಬೆಳಗಾವಿಯಲ್ಲಿ ನಡೆಸುವ ನವೆಂಬರ್. 1 ರ ಕರಾಳ ದಿನ ಆಚರಣೆಗೆ ಭಾಗವಹಿಸಬೇಕಿದ್ದ ನನಗೆ ಅಕ್ರಮ ನೋಟೀಸ್ ನೀಡಿ ಗಡಿ ಪ್ರವೇಶಿಸದಂತೆ ತಡೆದ ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಹಕ್ಕು ಉಲ್ಲಂಘನೆ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹಾಥಕಣಗಲೆ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಮತ್ತು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಕಾನೂನು ತಜ್ಞ ಸಮಿತಿಯ ಅಧ್ಯಕ್ಷನಾಗಿದ್ದ ನನ್ನ ಅವಧಿಯಲ್ಲಿ, ನವೆಂಬರ್ 1, 2025 ರಂದು, ನಾನು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರಯಾಣಿಸುತ್ತಿದ್ದಾಗ, ಬೆಳಗಾವಿ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿರುವ ಐಎಎಸ್ ಮೊಹಮ್ಮದ್ ರೋಷನ್ ಅವರು ಕರ್ನಾಟಕ ಗಡಿಯಲ್ಲಿ ಅಕ್ರಮ ನೋಟೀಸ್ ಹೊರಡಿಸಿದರು ಮತ್ತು ಅವರ ಆದೇಶದ ಮೇರೆಗೆ, ಪೊಲೀಸ್ ಆಡಳಿತವು ನನ್ನನ್ನು ಗಡಿ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆದರು.
ದೇಶದ ಜನರನ್ನು ಪ್ರತಿನಿಧಿಸುತ್ತಿದ್ದರೂ, ಯಾವುದೇ ಕ್ರಿಮಿನಲ್ ದಾಖಲೆ ಇಲ್ಲದಿದ್ದರೂ, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸದಂತೆ ನನ್ನನ್ನು ತಡೆಯುತ್ತಿರುವುದು ನ್ಯಾಯದ ದೃಷ್ಟಿಕೋನದಿಂದ ನನಗೆ ಅನ್ಯಾಯವಾಗಿದೆ.
ಈ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಯಾಗಿರುವ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ವಿರುದ್ಧ ಹಕ್ಕು ಉಲ್ಲಂಘನೆ ಪ್ರಕರಣ ದಾಖಲಿಸುವ ಮೂಲಕ ಸಹಕರಿಸಬೇಕು ಎಂದು ಮನವಿಯಲ್ಲಿ ಬರೆದಿದ್ದಾರೆ.

