ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳಿಗೆ ಕಾದಿದೆ ಸಧ್ಯದಲ್ಲೇ ಸಿಹಿ ಸುದ್ದಿ…!
ಬ್ರಿಟಿಷರ ವಿರುದ್ಧ ತೊಡೆತಟ್ಟಿ ನಿಂತಿದ್ದ ಸಂಗೋಳ್ಳಿ ರಾಯಣ್ಣನ ಹೋರಾಟದ ಗತವೈಭವ ಸಾರುವ ರಾಕ್ ಗಾರ್ಡನ್ ನಿರ್ಮಾಣ ಕಾರ್ಯ
ಬೆಳಗಾವಿ : ಬ್ರಿಟಿಷ್ ಸರ್ಕಾರದ ವಿರುದ್ಧ ತೊಡೆತಟ್ಟಿ ಹೋರಾಡಿ ದೇಶಕ್ಕಾಗಿ ಪ್ರಾಣ ನೀಡಿದ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತವರೂರಲ್ಲಿ 110 ಎಕರೆ ಪ್ರದೇಶದಲ್ಲಿ ರಾಷ್ಟ್ರಮಟ್ಟದ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗುತ್ತಿದ್ದೆ. ಈ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ನೋಡಲು ನಿತ್ಯ ನೂರಾರು ಜನರು ಆಗಮಿಸುತ್ತಿದ್ದಾರೆ.
ಬೈಲಹೊಂಗಲ ತಾಲೂಕಿನ ರಾಯಣ್ಣನ ಹುಟ್ಟೂರು ಸಂಗೊಳ್ಳಿ ಗ್ರಾಮದ ಹೊರವಲಯದಲ್ಲಿ ೧೦೦ ಎಕರೆ ಭೂಪ್ರದೇಶದಲ್ಲಿ ಸಂಗೊಳ್ಳಿ ರಾಯಣ್ಣನ ಸೈನಿಕ ಶಾಲೆ ಮತ್ತು 10 ಎಕರೆಯಲ್ಲಿ ರಾಯಣ್ಣ ಸಮಗ್ರ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ನಿರ್ಮಿಸಲಾಗುತ್ತಿದೆ. ಕೊರೊನಾ ಕಾರಣಕ್ಕೆ ಬಾಕಿ ಉಳಿಸಿಕೊಂಡಿದ್ದ ೮೭ ಕೋಟಿ ಅನುದಾನವನ್ನೂ ಈಗಾಗಾಲೇ ಬಿಡುಗಡೆ ಮಾಡಿ ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರ ಸೂಚನೆ ಕೊಟ್ಟಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ, ಸಂಗೊಳ್ಳಿ ಗ್ರಾಮದ ಹೊರವಲಯದಲ್ಲಿ ಒಟ್ಟು 110 ಎಕರೆ ಭೂಪ್ರದೇಶವನ್ನು ರಾಯಣ್ಣನ ಸೈನಿಕ ಶಾಲೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ನಿಗದಿಪಡಿಸಿ 267.67 ಕೋಟಿ ಅನುದಾನವನ್ನು ತೆಗೆದಿಡಲಾಗಿತ್ತು. ಬೆಳಗಾವಿಯ ಸುವರ್ಣಸೌದ ನಿರ್ಮಾಣ ಮಾಡಿದ್ದ ಶಿರ್ಕೆ ಕಂಪನಿಗೆ ಸೈನಿಕ ಶಾಲೆಯ ಕಾಮಗಾರಿಯ ಗುತ್ತಿಗೆಯನ್ನು ನೀಡಲಾಗಿತ್ತು. ಆದ್ರೆ, ಮುಗಿಯುವ ಕೊನೆಯ ಹಂತಕ್ಕೆ ಬರುವಷ್ಟರಲ್ಲಿ ದೇಶದಲ್ಲಿ ಕೊರೊನಾ ವಕ್ಕರಿಸಿಕೊಂಡ ನಂತರ ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದವು. ಸದ್ಯ ತೆಗೆದಿಟ್ಟ ಎಲ್ಲ ಅನುದಾನ ಬಿಡುಗಡೆ ಆಗಿರುವ ಹಿನ್ನೆಲೆ ಕಾಮಗಾರಿಗಳು ವೇಗ ಪಡೆದುಕೊಂಡಿವೆ.
ಸಂಗೊಳ್ಳಿಯಲ್ಲಿ ಈಗಾಗಲೇ ರಾಯಣ್ಣ ಸ್ಮಾರಕ ಸೈನಿಕ ಶಾಲೆ, ರಾಕ್ ಗಾರ್ಡನ್, ಕಲ್ಯಾಣಮಂಟಪ ಮತ್ತಿತರ ಕಾಮಗಾರಿಗಳು ಹಾಗೂ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಸ್ಮಾರಕ ಮ್ಯೂಸಿಯಂ (ವೀರಭೂಮಿ), ಯಾತ್ರಿನಿವಾಸ ನಿರ್ಮಾಣ, ರಾಯಣ್ಣ ಸ್ನಾನ ಮಾಡುತ್ತಿದ್ದ ಕೆರೆಯ ಜೀರ್ಣೋದ್ಧಾರ ಸೇರಿದಂತೆ ಇತರ ಕಾಮಗಾರಿಗಳು ಬಹುತೇಕ ಕೊನೆಯ ಹಂತಕ್ಕೆ ತಲುಪಿದೆ.
ಸೈನಿಕ ಶಾಲೆಯಲ್ಲಿ ಏನೇನಿರಲಿದೆ : 7೦ ಎಕರೆಯಲ್ಲಿ ನಿರ್ಮಾನಗೊಳ್ಳುತ್ತಿರುವ ಸೈನಿಕ ಶಾಲೆಯಲ್ಲಿ ೬ ರಿಂದ ೧೨ ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ವಸತಿ ಸೌಲಭ್ಯ, ಭೋಜನಾಲಯ, ಗ್ರಂಥಾಲಯ, ಶಿಕ್ಷಕರ ವಸತಿ ಗೃಹ, ಆಡಿಟೋರಿಯಂ ಹಾಗೂ ಕೆಲಸಗಾರರು ಉಳಿದುಕೊಳ್ಳಲು ಹೈಟೆಕ್ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. ಇದಲ್ಲದೇ ೩೦ ಎಕರೆ ವಿಸ್ತೀರ್ಣದಲ್ಲಿ ಬೃಹತ್ ಕ್ರೀಡಾ ಮೈದಾನ ನಿರ್ಮಿಸಲಾಗಿದ್ದು, ಒಳಾಂಗಣ ಮತ್ತು ಹೊರಾಂಗಣದಲ್ಲಿ ಬರುವ ಈಜುಕೊಳ, ಹಾರ್ಸ್ ರೈಡಿಂಗ್,ಹಾಕಿ,ಕಬಡ್ಡಿ, ವಾಲಿಬಾಲ್,ಕ್ರಿಕೆಟ್ ಅಥ್ಲೆಟಿಕ್ಸ್ ಸೇರಿದಂತೆ ಎಲ್ಲ ಕ್ರೀಡೆಗಳಿಗೂ ಸಂಬOಧಿಸಿದ ಆಟದ ಮೈದಾನವನ್ನು ಸಿದ್ಧಪಡಿಸಲಾಗುತ್ತಿದೆ.
ರಾಯಣ್ಣನ ಸಮಗ್ರ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ನಿರ್ಮಾಣ : ಸೈನಿಕ ಶಾಲೆಯ ಎದರಿಗೆ ಸುಮಾರು 10 ಎಕರೆ ಪ್ರದೇಶದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಗ್ರ ಜೀವನ ಚರಿತ್ರೆ ಹಾಗೂ ಕಿತ್ತೂರು ಚೆನ್ನಮ್ಮನ ಜೀವನದ ಘಟನೆಗಳನ್ನು ಸಾರುವ 1600 ಕ್ಕೂ ಹೆಚ್ಚಿನ ವಿನ್ಯಾಸಗೊಳಿಸಿ ರಾಕ್ ಗಾರ್ಡನ್ ನಿರ್ಮಿಸಲಾಗುತ್ತಿದೆ. ಇದರ ಹೊಣೆಯನ್ನು ಉತ್ಸವ ರಾಕ್ ಗಾರ್ಡನ್ ವಿನ್ಯಾಸಕ ಟಿ.ಬಿ.ಸೋಲಬಕ್ಕನವರ ವಹಿಸಿಕೊಂಡಿದ್ದಾರೆ. ಇಲ್ಲಿ ಸಂಗೊಳ್ಳಿ ರಾಯಣ್ಣನ ಹೋರಾಟದ ಕುರಿತಾಗಿರುವ ಮೂರ್ತಿಗಳು, ಗರಡಿ ಮನೆ, ಕುಸ್ತಿ ಮೈದಾನ, ವೀರಭದ್ರ ದೇವಸ್ಥಾನ, ದರ್ಬಾರ್ ಹಾಲ್, ಬ್ರಿಟಿಷರೊಂದಿಗಿನ ಯುದ್ಧದ ಸನ್ನಿವೇಶಗಳು ಸೇರಿದಂತೆ ಇಡೀ ಸಂಗೊಳ್ಳಿ ರಾಯಣ್ಣನ ಹೋರಾಟದ ಇತಿಹಾಸದ ಚಿತ್ರಣವನ್ನೇ ಮೂರ್ತಿಗಳ ರೂಪದಲ್ಲಿ ಕಣ್ತುಂಬಿಕೊಳ್ಳಬಹುದು. ಸದ್ಯ ಕಾಮಗಾರಿ ವೇಗ ಪಡೆದುಕೊಂಡಿದ್ದರೂ ಪೂರ್ಣಗೊಳ್ಳಲು ಸಾಕಷ್ಟು ತಿಂಗಳುಗಳು ಹಿಡಿಯಲಿವೆ. ಹೀಗಾಗಿ ಆದಷ್ಟು ಬೇಗ ಕಾಮಗಾರಿಯನ್ನು ಮುಗಿಸುವ ಮೂಲಕ ಪ್ರವಾಸಿಗರಿಗೆ ಅವಕಾಶ ನೀಡಬೇಕೆಂದು ಗ್ರಾಮಸ್ಥರ ಒತ್ತಾಸೆಯಾಗಿದೆ.
ಹಳ್ಳಿಗಳ ಅಭಿವೃದ್ಧಿಗೆ ಪೂರಕ : ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಪ್ರದೇಶದಲ್ಲಿ ರಾಷ್ಟ್ರಮಟ್ಟ ಸೈನಿಕ ಶಾಲೆ ನಿರ್ಮಿಸುತ್ತಿರುವುದು ಇದೇ ಮೊದಲು. ಸಂಪನ್ಮೂಲಗಳ ದೃಷ್ಟಿಯಿಂದ ದೊಡ್ಡಮಟ್ಟದ ಶಿಕ್ಷಣ ಸಂಸ್ಥೆಗಳನ್ನು ನಗರದ ಪ್ರದೇಶಗಳಲ್ಲಿ ಹೆಚ್ಚಿರುತ್ತವೆ. ಆದರೆ ಕ್ರಾಂತಿಕಾರಿ ನೆಲದ ಜೊತೆಗೆ ಪುಟ್ಟ ಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸೈನಿಕ ಶಾಲೆಯಿಂದ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಲಿದ್ದು, ಬೀದಿಬದಿ ವ್ಯಾಪಾರಿಗಳ ಜೊತೆಗೆ ಸಣ್ಣಪುಟ್ಟ ಉದ್ಯಮಗಳು ಬೆಳವಣಿಗೆಗೆ ಸಹಕಾರಿ ಆಗಲಿವೆ. ನಗರ ಪ್ರದೇಶಕ್ಕೆ ಸೀಮಿತವಾದ ಶಿಕ್ಷಣ ಸಂಸ್ಥೆಗಳನ್ನು ಗ್ರಾಮೀಣ ಪ್ರದೇಶಕ್ಕೂ ಕೊಂಡ್ಯೊಯುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರಲ್ಲಿ ಸ್ಥಳೀಯ ಮಕ್ಕಳಿಗೆ ಆದ್ಯತೆ ನೀಡುವ ಕೆಲಸವನ್ನು ಮಾಡಬೇಕಿದೆ.