ಅ. 8 ಕ್ಕೆ ವೀರಭದ್ರೇಶ್ವರ ಜಯಂತಿ ಆಚರಣೆ : ಹುಕ್ಕೇರಿ ಶ್ರೀ
ಬೆಳಗಾವಿ : ಬರುವ ಅಕ್ಟೋಬರ್ 8 ರಂದು ವೀರಭದ್ರೇಶ್ವರ ಜಯಂತಿ ಉತ್ಸವ ಕಾರ್ಯಕ್ರಮ ಹಾಗೂ ವೀರಶೈವ ಸಮುದಾಯಕ್ಕೆ ಕೇಂದ್ರ OBC ಮೀಸಲಾತಿ ನೀಡುವಂತೆ ಹಕ್ಕೊತ್ತಾಯ ಮಾಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ನೂರಕ್ಕೂ ಅಧಿಕ ಮಠಾಧೀಶರ ನೇತೃತ್ವದಲ್ಲಿ ಅ.8ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಉತ್ಸವದಲ್ಲಿ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ, ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿಯ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ನಿಡಸೋಸಿ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮತ್ತು ಹುಬ್ಬಳ್ಳಿ ಮೂರು ಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ,
ಶಿರಹಟ್ಟಿ ಪಕೀರೇಶ್ವರ ದಿಂಗಾಲೇಶ್ವರ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.

ಈ ಸುದ್ದಿಗೋಷ್ಠಿಯಲ್ಲಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ, ಹುಕ್ಕೇರಿ ಹಿರೇಮಠ, ಕಾರ್ಯಕ್ರಮದ ಉಸ್ತುವಾರಿ ಡಾ. ವಿ.ಐ. ಪಾಟೀಲ, ಅಶೋಕ ಪೂಜಾರಿ, ಡಾ. ಸುಭಾಷ ಪಾಟೀಲ, ಪ್ರದೀಪ ಕಂಕಣವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


