ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ ; ಕೂಡಲಸಂಗಮ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು..!

ಬೆಂಗಳೂರು : ರಾಜಧಾನಿಯ ಧಾರ್ಮಿಕ ವಲಯದಲ್ಲಿ ಇಂದು ಸ್ಫೋಟಕ ಸುದ್ದಿಯೊಂದು ಹೊರಬಿದ್ದಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಹಾಗೂ ಖಾಸಗಿ ವಿಡಿಯೋ ಬಳಸಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ತ್ಯಾಗರಾಜನಗರ ನಿವಾಸಿಯಾದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ಪ್ರಕರಣವು ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಹಸವಾಗಿದೆ.
ದೂರುದಾರ ಮಹಿಳೆಯು ತಾನು ಸ್ವಾಮೀಜಿಯವರ ಭಕ್ತೆಯಾಗಿದ್ದೆ ಎಂದು ತಿಳಿಸಿದ್ದಾರೆ. ತನ್ನನ್ನು ಮಠಕ್ಕೆ ಕರೆಸಿಕೊಂಡ ಸ್ವಾಮೀಜಿ ಪ್ರಸಾದ ನೀಡುವ ನೆಪದಲ್ಲಿ ವಿಶ್ವಾಸದ್ರೋಹ ಎಸಗಿದ್ದಾರೆ ಎಂಬುದು ಮಹಿಳೆಯ ಗಂಭೀರ ಆರೋಪವಾಗಿದೆ. ತನ್ನ ಅರಿವಿಲ್ಲದಂತೆ ವಿಡಿಯೋ ಚಿತ್ರೀಕರಿಸಿಕೊಂಡಿದ್ದು, ಈಗ ಅದನ್ನು ಮುಂದಿಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದಾರೆ ಮತ್ತು ಒಂದು ವೇಳೆ ಒಪ್ಪದಿದ್ದರೆ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ.
ಈ ಘಟನೆಯಿಂದ ತಮಗೆ ತೀವ್ರ ಜೀವಭಯ ಮತ್ತು ಮಾನಸಿಕ ಒತ್ತಡ ಉಂಟಾಗಿದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕೇವಲ ಪೊಲೀಸರಿಗೆ ಮಾತ್ರವಲ್ಲದೆ, ಮುಖ್ಯಮಂತ್ರಿಗಳು, ಗೃಹ ಸಚಿವರು, ರಾಜ್ಯ ಮಹಿಳಾ ಆಯೋಗ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೂ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ. ಕೂಡಲೇ ಎಫ್ಐಆರ್ (FIR) ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಅವರು ಮನವಿ ಮಾಡಿದ್ದಾರೆ.
ಆರೋಪದ ಬೆನ್ನಲ್ಲೇ ಸಂಬಂಧಿತ ಅಧಿಕಾರಿಗಳು ಪ್ರಾಥಮಿಕ ಪರಿಶೀಲನೆ ಆರಂಭಿಸಿದ್ದಾರೆ. ಪ್ರಭಾವಿ ಧಾರ್ಮಿಕ ಮುಖಂಡರೊಬ್ಬರ ಮೇಲೆ ಇಂತಹ ಗಂಭೀರ ಸ್ವರೂಪದ ದೂರು ದಾಖಲಾಗಿರುವುದು ಮಠಾಧೀಶರ ವಲಯದಲ್ಲಿಯೂ ಆತಂಕ ಮೂಡಿಸಿದೆ. ಆದರೆ, ತನಿಖೆಯಲ್ಲಿ ಆರೋಪಗಳು ಸಾಬೀತಾಗುವವರೆಗೂ ಯಾರನ್ನೂ ತಪ್ಪಿತಸ್ಥರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಪ್ರಕರಣದ ಕುರಿತು ಮುಂದಿನ ತನಿಖಾ ವರದಿಯಿಂದ ಮಾತ್ರ ಸತ್ಯಾಸತ್ಯತೆ ಹೊರಬೀಳಬೇಕಿದೆ.


