ಬೆಳಗಾವಿ: ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು, ಮುಂಗಾರು ಮಳೆ ತೀವ್ರ ಕೊರತೆಯಿಂದ ಜಿಲ್ಲೆಯ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದಕಾರಣ ಮಳೆಗಾಗಿ ನಾಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮೂರು ದಿನ ಬೆಳಗಾಂ ಶುಗರ್ಸ್‌ನಿಂದ ಮೋಡ ಬಿತ್ತನೆ ಮಾಡಲಾಗುತ್ತಿದ್ದು, ರಾಜ್ಯ, ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಗೆ ಬಳಸುವ ವಿಮಾನಗಳು ಸಾಂಬ್ರಾ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.

ಇನ್ನು, ಮೋಡಗಳ ಲಭ್ಯತೆಯ ಅನುಗುಣವಾಗಿ ಅಲ್ಲಲ್ಲಿ ಮೋಡ ಬಿತ್ತನೆ ಮಾಡಲಾಗುವುದು. ಈ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಮೋಡ ಬಿತ್ತನೆ ಕಾರ್ಯ ಬೆಳಗಾವಿ ಜಿಲ್ಲೆಗೆ ಅಷ್ಟೇ ಸೀಮಿತವಾಗಿದ್ದು, ಮೂರು ದಿನಕ್ಕಾಗುವ ಖರ್ಚು ವೆಚ್ಚವನ್ನು ಬೆಳಗಾಂ ಶುಗರ್ಸ್‌ನಿಂದ ಭರಿಸಲಾಗುವುದು ಎಂದು ಹೇಳಿದರು.