Belagavi – ಒಂದೇ ದಿನ ಇಬ್ಬರು ನಾಯಕರ ಆಗಮನ ; ಅತ್ತ ಸಿದ್ದು, ಇತ್ತ ಮೋದಿ
ಬೆಳಗಾವಿ : ಬೆಳಗಾವಿ ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು ರಾಜ್ಯದ ಎರಡನೇ ಹಂತದ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಹಮ್ಮಿಕೊಂಡಿವೆ. ಈ ನಡುವೆ ಭಾನುವಾರ 28 ರಂದು ಪ್ರಧಾನಿ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಬೆಳಗಾವಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಕಣ ಮತ್ತಷ್ಟು ರಂಗು ಪಡೆದಿದೆ.
ಇಂದು ಶನಿವಾರ ಸಂಜೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಖಾಸಗಿ ಹೊಟೆಲ್ ಒಂದರಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ನಗರದ ಮಾಲಿನಿ ಸಿಟಿಯಲ್ಲಿ ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡ ನಂತರ ವಿವಿಧ ಜಿಲ್ಲೆಯ ಪ್ರವಾಸಕ್ಕೆ ತೆರಳಲಿದ್ದಾರೆ.
ಸೋಮವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಇನ್ನೂ ಇದೇ ದಿನ ಸವದತ್ತಿ ತಾಲೂಕಿನ ಯರಗಟ್ಟಿ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ನಡೆಸಲಿದ್ದಾರೆ.
ಒಟ್ಟಿನಲ್ಲಿ ಇಬ್ಬರು ಜನಪ್ರಿಯ ನಾಯಕರು ಒಂದೇ ದಿನ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ಆಯಾ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ಹೆಚ್ಚಾಗುವಂತೆ ಮಾಡಿದೆ. ಇನ್ನೂ ಇಬ್ಬರು ನಾಯಕರ ಭಾಷಣ ಏನಿರಲಿದೆ ಎಂಬ ಕುತೂಹಲ ಮೂಡಿಸಿದ್ದು ಸುಳ್ಳಲ್ಲ.


