ಮೃಣಾಲ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಕೆ ; ಡಿಸಿಎಂ ಡಿಕೆಶಿ ಉಪಸ್ಥಿತಿ
ಬೆಳಗಾವಿ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಸೋಮವಾರ ನಸಮಪತ್ರ ಸಲ್ಲಿಕೆ ಮಾಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಜಿಲ್ಲೆಯ ನಾಯಕರು ಸಾಥ್ ನಿಡಿದರು.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ, ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ. ಕಾಂಗ್ರೆಸ್ ಶಾಸಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮನೆಯಲ್ಲಿ ಮೃಣಾಲ್ ಹೆಬ್ಬಾಳ್ಕರ್ ಗೋಪೂಜೆ : ಮನೆಯಲ್ಲಿ ವಿವಿಧ ಮಠಾಧೀಶರ ಪಾದಪೂಜೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ, ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಕೆಗೂ ಮುನ್ನ ಕುವೆಂಪು ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳ್ಕರ್ ಅವರ ಪತ್ನಿ ಹಿತಾ ಹೆಬ್ಬಾಳ್ಕರ್ ಗೋಪೂಜೆಯಲ್ಲಿ ಭಾಗವಹಿಸಿದರು.
ಗೋಪೂಜೆ ಬಳಿಕ ವಿವಿಧ ಮಠಾಧೀಶರು ಸಚಿವರ ನಿವಾಸಕ್ಕೆ ಆಗಮಿಸಿ ಆಶೀರ್ವದಿಸಿದರು. ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುಕ್ಕೇರಿ ಹೀರೆಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ಕಾರಂಜಿ ಮಠದ ಗುರುಸಿದ್ದ ಸ್ವಾಮೀಜಿ ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರು ಆಶೀರ್ವದಿಸಿದರು.
2 ಲಕ್ಷ ಮತಗಳ ಅಂತರದಿಂದ ಗೆಲುವು
ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾನೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು. ಹಟ್ಟಿಹೊಳಿಯಲ್ಲಿ ವೀರಭದ್ರೇಶ್ವರ ಹಾಗೂ ಸುಳೇಭಾವಿಯಲ್ಲಿ ಲಕ್ಷ್ಮೀ ಪೂಜೆ ಮಾಡಿದ್ದೇವೆ. ಗುರುಗಳನ್ನು ಮನೆಗೆ ಕರೆದು ಪಾದ ಪೂಜೆ ಮಾಡಿದ್ದು, ವಿಜಯಯಾತ್ರೆಯ ಸಂಕಲ್ಪ ಇಟ್ಟುಕೊಂಡು ಪೂಜೆ ಮಾಡಿದ್ದೇವೆ ಎಂದು ಹೇಳಿದರು.
ನಾಮಪತ್ರ ಸಲ್ಲಿಸುವ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಣ್ ಸವದಿ, ಪ್ರಕಾಶ್ ಹುಕ್ಕೇರಿ, ಮಹಾಂತೇಶ್ ಕೌಜಲಗಿ, ವಿಶ್ವಾಸ್ ವೈದ್ಯ, ಅಶೋಕ್ ಪಟ್ಟಣ್, ರಾಜು ಸೇಠ್, ಗಣೇಶ್ ಹುಕ್ಕೇರಿ, ಬಾಬಾ ಸಾಹೇಬ್ ಪಾಟೀಲ್, ರಾಜು ಕಾಗೆ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರರು ಹಾಜರಿರುವರು ಎಂದರು. ಜೊತೆಗೆ ಮಹಾರಾಷ್ಟ್ರದಿಂದ ಶಾಸಕ ದೀರಜ್ ದೇಶಮುಖ್ ಅವರು ಬರ್ತಿದ್ದಾರೆ ಎಂದರು.
ಬೆಳಗಾವಿ ಜಿಲ್ಲೆಯ ಮನೆ ಮಗನಿಗೆ ಸ್ವಾಭಿಮಾನಕ್ಕೆ ಮತ ನೀಡಿ ಎಂದು ಸಚಿವರು ಮನವಿ ಮಾಡಿದರು.
ನಮ್ಮ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಕಾರ್ಯಕರ್ತರ ಶ್ರಮ ಈ ಬಾರಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಹೇಳಿದರು. ಪ್ರತಿ ವರ್ಗದ ಜನರ ಹತ್ತಿರ ಹೋಗಿದ್ದೇನೆ. ಬೆಳಗಾವಿ ಅಭಿವೃದ್ಧಿಯೇ ನನ್ನ ಕನಸು ಎಂದು ಹೇಳಿದರು.
ಈ ಬಾರಿ ಜನರು ಬೆಳಗಾವಿ ಯುವಕನ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದ್ದು, ಮನೆ ಮಗನಾಗಿ ನನ್ನನ್ನು ಸ್ವೀಕಾರ ಮಾಡಿದ್ದಾರೆ. ಯುವಕರ ಪ್ರತಿಯೊಂದು ಹಬ್ಬದಲ್ಲೂ ಸಹ ನಾವು ಭಾಗವಾಗಿದ್ದೇವೆ. ಈ ಬಾರಿ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಸಮೇತ ಸುಳೇಭಾವಿಯಲ್ಲಿರುವ ಸುಪ್ರಸಿದ್ಧ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ, ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.


