ಸಮರ್ಥ ತಂಡ ಕಟ್ಟಿದ್ದೇವೆ ; ಗೆಲ್ಲಿಸುವ ಜವಾಬ್ದಾರಿ ನಿಮ್ಮದು – ಪ್ರಧಾನಿ ಮೋದಿ
ಕುಡಚಿ : ಈ ಬಾರಿ ಸಮರ್ಥ ಅಭ್ಯರ್ಥಿಗಳ ತಂಡ ರಚಣೆಯಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹೊಸ್ತಿಲಲ್ಲಿ, ರಾಜ್ಯದ ಅಭಿವೃದ್ಧಿಗಾಗಿ ತಾವು ಈ ಬಾರಿ ಬಿಜೆಪಿ ಗೆಲ್ಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕೋಳಿಗುಡ್ಡ ಗ್ರಾಮದಲ್ಲಿ ನಡೆದ ಬಿಜೆಪಿ ಪ್ರಚಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಇವರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಗಳಿಂದ ಅಭಿವೃದ್ಧಿಗೆ ಹಿನ್ನಡೆ ಉಂಟಾಗಿದೆ. ಈ ಕಾರಣದಿಂದ ತಾವು ಈ ಬಾರಿ ನಮ್ಮ ಅಭ್ಯರ್ಥಿಗಳಿಗೆ ಮತ ಕೊಡವೇಕು. ನಮ್ಮ ಡಬಲ್ ಇಂಜಿನ್ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.

ಕಾಂಗ್ರೆಸ್ ಭ್ರಷ್ಟಾಚಾರದಿಂದ ಈ ದೇಶದ ಜನರಿಗೆ ಸಂಕಷ್ಟ ಎದುರಾಗಿತ್ತು. ಕಳೆದ ಒಂಬತ್ತು ವರ್ಷದಿಂದ ದೇಶದಲ್ಲಿ ಸುಭದ್ರ ಸರ್ಕಾರ ಅಸ್ತಿತ್ವದಲ್ಲಿದ್ದು ಜನರ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆ ಉಂಟಾಗಿದೆ. ಈ ಬಾರಿ ಕರ್ನಾಟಕದಲ್ಲಿ ಕಮಲ ಅರಳಿಸುವಂತೆ ಜನರಲ್ಲಿ ಮನವಿ ಮಾಡಿದರು.
ಮಾತಿನ ಉದ್ದಕ್ಕೂ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಇವರು. ವಿರೋಧ ಪಕ್ಷದವರಿಗೆ ನನ್ನ ಜಪ ಮಾಸುವುದು ಮಾತ್ರ ಕೆಲಸ. ಮೋದಿಯನ್ನು ಟೀಕೆ ಮಾಡುವುದು ಇವರ ಕಾಯಕವಾಗಿದೆ. ನಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇವೆ. ಬಡ ಹಾಗೂ ಹಿಂದುಳಿದ ವರ್ಗದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇವೆ. ಈ ಬಾರಿ ಬಿಜೆಪಿಗೆ ಬಹುಮತ ಕೊಡಿ, ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡುತ್ತದೆ ಎಂದರು.

ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ, ಸಕ್ಕರೆ ಜಿಲ್ಲೆಗೆ ನಮನ ಸಲ್ಲಿಸುದಾಗಿ ತಿಳಿಸಿದರು. ಕಬ್ಬು ಬೆಳಗಾರರಿಗೆ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು ರೈತರ ಬಾಳು ಬೆಳಕಾಗಿಸಲಾಗಿದೆ ಎಂದರು. ಕಬ್ಬಿಗೆ ವೈಜ್ಞಾನಿಕ ಬೆಲೆ ನೀಡುವ ದೃಷ್ಟಿಯಿಂದ ಹತ್ತು ಲಕ್ಷ ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಕುಡಚಿ ಸೇರಿಂತೆ ಬೆಳಗಾವಿ ಜಿಲ್ಲೆಯ ಎಲ್ಲಾ ಕ್ಷೇತ್ರದ ಗೆಲುವಿಗೆ ಜನ ಆಶಿರ್ವಾದ ಮಾಡಬೇಕು. ಕಳೆದ ತಿಂಗಳು ಸಕ್ಕರೆ ನಾಡಿನ ಜನ ರೋಡ್ ಶೋ ನಲ್ಲಿ ಅಭೂತಪೂರ್ವ ಬೆಂಬಲ ನೀಡಿದ್ದನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ. ಈ ಬಾರಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಈರಣ್ಣ ಕಡಾಡಿ. ಶಾಸಕರಾದ ಶ್ರೀಮಂತ ಪಾಟೀಲ್, ದುರ್ಯೋಧನ ಐಹೊಳೆ, ಮುಖಂಡರಾದ ರಮೇಶ್ ದೇಶಪಾಂಡೆ, ರಾಜೇಶ್ ನೇರ್ಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


