ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಹಿಂದಿನ ಬಿಜೆಪಿ ಸರ್ಕಾರಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ಇಂದು ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿಶೇಷ ನ್ಯಾಯಾಲಯದಲ್ಲಿನ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಪ್ರಿಯಾಂಕ್ ಖರ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದಿಸಿ, ಇದೇ ಆರೋಪದಲ್ಲಿ ಇತರೆ ಆರೋಪಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿ ಹೈಕೋರ್ಟ್‌ನ ಮತ್ತೊಂದು ಪೀಠ ಅರ್ಜಿ ವಜಾ ಮಾಡಿತ್ತು.

ಇದಕ್ಕೆ ಸುಪ್ರೀಂ ಕೋರ್ಟ್‌ ತಡೆ ವಿಧಿಸಿದೆ. ಹೀಗಾಗಿ ಅರ್ಜಿದಾರರ ವಿರುದ್ಧ ವಿಚಾರಣೆಗೆ ತಡೆ ನೀಡಬೇಕೆಂದು ಕೋರಿದರು.

ಇದನ್ನು ಆಲಿಸಿದ ಪೀಠವು, ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಎಲ್ಲಾ ಪ್ರಕ್ರಿಯೆಗಳಿಗೆ ಮುಂದಿನ ವಿಚಾರಣೆಯವರೆಗೆ ತಡೆ ವಿಧಿಸಲಾಗಿದೆ ಎಂದು ಮಧ್ಯಂತರ ಆದೇಶ ನೀಡಿತು.