
ಮಾ. 20 ಕ್ಕೆ ಬೆಳಗಾವಿಗೆ ರಾಗಾ ; ಅದ್ಧೂರಿ ಸಮಾವೇಶಕ್ಕೆ ಕಾಂಗ್ರೆಸ್ ತಯಾರಿ

ಬೆಳಗಾವಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಭಾರತ್ ಜೋಡೋ ಪಾದಯಾತ್ರೆ ಮುಗಿಸಿ ಬೆಳಗಾವಿಯಲ್ಲಿ ಮಾ.20 ಕ್ಕೆ ಸಾರ್ವಜನಿಕ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಇವರು. ರಾಹುಲ್ ಗಾಂಧಿ 20 ಕ್ಕೆ ಬೆಳಗಾವಿಗೆ ಆಗಮಿಸುತ್ತಾರೆ. ಭಾರತ್ ಜೋಡೋ ಯಾತ್ರೆ ಕೈಗೊಂಡ ನಂತರ ಅವರ ಆಚಾರ, ವಿಚಾರ, ಅನುಭವವನ್ನು ಹಂಚಿಕೊಳ್ಳಲಿದ್ದಾರೆ. ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ನೀಡಲು ಅವರು ಆಗಮಿಸುತ್ತಿದ್ದಾರೆ ಎಂದರು. ಪ್ರಜಾ ಧ್ವನಿ ಯಾತ್ರೆ ಮಾಡುತ್ತಿದ್ದೇವೆ. ಜನರು ಅಭೂತಪೂರ್ವ ಬೆಂಬಲ ಸೂಚಿಸುತ್ತಿದ್ದಾರೆ. ಸ್ವಯಂ ಪ್ರೇರಿತದಿಂದ ಬರುತ್ತಿದ್ದಾರೆ ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಬೆಳಗಾವಿಯಲ್ಲಿ ಮಾ.20 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯುವಕರ ರ್ಯಾಲಿ ನಡೆಸಿ ಸಮಾವೇಶ ನಡೆಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು ಐದು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಧಾರವಾಡದ ಬಿಜೆಪಿಯ ಹಿರಿಯ ನಾಯಕ ಮೋಹನ ಲಿಂಬಿಕಾಯಿ ಅವರು, ಮುಖ್ಯಮಂತ್ರಿ ಅವರಿಗೆ ಕಾನೂನು ಸಲಹೆಗಾರರಾಗಿದ್ದರು. ಸುಮಾರು 30 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಬಿಜೆಪಿಯ ವಕ್ತಾರರಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ.ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಲಿಂಬಿಕಾಯಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ ಎಂದರು.
ಮಹಾರಾಷ್ಟ್ರ ಸರಕಾರದವರು ಅನಗತ್ಯವಾಗಿ ಮೇಲಿಂದ ಮೇಲೆ ಕಾಲು ಕೆದರುವ ಕೆಲಸ ಮಾಡುತ್ತಿದ್ದಾರೆ. ಇದೊಂದು ಷಡ್ಯಂತ್ರ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನ ಕೆಣಕುವ ಪ್ರಯತ್ನ ಮಾಡುತ್ತಿದೆ. ಕರ್ನಾಟಕಕ್ಕೆ ಅನ್ಯಾಯವಾದರೂ ಕೂಡ ಮಹಾಜನ್ ವರದಿಯನ್ನು ಒಪ್ಪಿಕೊಂಡಿದ್ದರೂ ಕರ್ನಾಟಕದ 865 ಹಳ್ಳಿಗಳಲ್ಲಿ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡಿ ವ್ಯವಹಾರ ಮಾಡುತ್ತಿದೆ. ಇವರು ನಿಲುವನ್ನು ಕಟುವಾಗಿ ಖಂಡಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ,ಸಲೀಂ ಅಹ್ಮದ, ಕಾಂಗ್ರೆಸ್ ನಾಯಕರಾದ ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.