Belagavi : ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯಲಕ್ಷ್ಮೀ  ಸಕ್ಕರೆ ಕಾರ್ಖಾನೆ ಮೇಲೆ ಅಪರಾಧ ತನಿಖಾ ದಳ ( ಸಿಐಡಿ ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ( Gokak – Chikkanadi ) ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆ ಮೇಲೆ ಮಂಗಳವಾರ ಮಧ್ಯಾಹ್ನ ಸಿಐಡಿ ಅಧಿಕಾರಿಗಳು  ದಾಳಿ ಮಾಡಿ ಪರಿಶೀಲನೆ ನಡೆಸಿದರು.

ಸೌಭಾಗ್ಯಲಕ್ಷ್ಮೀ ( Soubhagyalaxmi ) ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ, ಅಪೆಕ್ಸ್‌ ಬ್ಯಾಂಕ್ ನಿಂದ 439.7 ಕೊಟಿ ಸಾಲ ಪಡೆದಿದ್ದರು. ರಮೇಶ್ ಜಾರಕಿಹೊಳಿ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಸದಸ್ಯರು ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜ‌ರ್ ರಾಜಣ್ಣ ಮುತ್ತಶೆಟ್ಟಿ ಜ.5ರಂದು ಬೆಂಗಳೂರಿನಲ್ಲಿ ವಿಶ್ವೇಶ್ವರ ಪುರಂ‌ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಇನ್ನೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಸಿಐಡಿ ( CID ) ತನಿಖೆಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಇಂದು ಚಿಕ್ಕನಂದಿ ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ.