ಹೈಕಮಾಂಡ್ ಜೊತೆ ಚರ್ಚೆ ಮಾಡಿದ್ದೇನೆ ; ಯತ್ನಾಳ್ ಉಚ್ಚಾಟನೆ ವಾಪಸ್ ಪಡೆಯುವ ವಿಶ್ವಾಸವಿದೆ – ರಮೇಶ್ ಜಾರಕಿಹೊಳಿ
ಬೆಳಗಾವಿ : ಹೈಕಮಾಂಡ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಭಾವಿಸಿರಲಿಲ್ಲ. ಈ ಕುರಿತು ಹೈಕಮಾಂಡ್ ನ ದೊಡ್ಡ ನಾಯಕರ ಜೊತೆ ಚರ್ಚೆ ಮಾಡಿದ್ದು, ಉಚ್ಚಾಟನೆ ವಾಪಸ್ ಪಡೆಯುವಂತೆ ಮನವಿ ಮಾಡುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ನಮ್ಮ ಬೆನ್ನು ನಮಗೆ ಕಾಣುವುದಿಲ್ಲ. ನಮ್ಮಲ್ಲಿ ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳುತ್ತೇವೆ. ಹೈಕಮಾಂಡ್ ನಾಯಕರಿಗೆ ಉಚ್ಚಾಟನೆ ವಾಪಸ್ ಪಡೆಯುವಂತೆ ಮನವಿ ಮಾಡುತ್ತೇವೆ ಎಂದರು.
ಯತ್ನಾಳ್ ಜೊತೆ ನಮ್ಮ ಇಡೀ ತಂಡ ಇದೆ. ನಾವೂ ಅವರನ್ನು ಬಿಟ್ಟಿಲ್ಲ. ನಾಳೆ ಬೆಂಗಳೂರಿನಲ್ಲಿ ಸಭೆ ನಡೆಸುತ್ತೇವೆ. ಯತ್ನಾಳ್ ಮನವೊಲಿಸಿ ಅವರಿಂದ ಹೈಕಮಾಂಡ್ ಗೆ ಒಟ್ಟಾಗಿ ಮನವಿ ಸಲ್ಲಿಸುತ್ತೇವೆ ಎಂದರು.
ಹೈಕಮಾಂಡ್ ನಾಯಕರು ಯತ್ನಾಳ್ ಉಚ್ಚಾಟನೆ ವಾಪಸ್ ಪಡೆಯುವ ವಿಶ್ವಾಸ ಇದೆ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷ ಕಟ್ಟುತ್ತೇವೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ನಾವು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದರು.


