ಬಿ.ಎಲ್ ಸಂತೋಷ್ ಜೊತೆ ಕಾಣಿಸಿಕೊಂಡ ಗೋಕಾಕ್ ಸಾಹುಕಾರ್ ; ಸದ್ದಿಲ್ಲದೆ ಸಿದ್ಧವಾದ ರಣತಂತ್ರ…?
ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆ ನಂತರದಲ್ಲಿ ಕೊಂಚ ಸಾರ್ವಜನಿಕವಾಗಿ ಕಾಣಿಕೊಳ್ಳದ ಮಾಜಿ ಮಂತ್ರಿ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಸಧ್ಯ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದು ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಕಳೆದ ವಿಧಾನಸಭಾ ಚುನಾವಣೆ ನಂತರದಲ್ಲಿ ಬಿಜೆಪಿ ಹೀನಾಯ ಸೋಲಿನ ಬಳಿಕ ಸಧ್ಯ ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದೆ. ಈ ಕಾರಣದಿಂದ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಹಾಗೂ ಬಿ.ಎಲ್ ಸಂತೋಷ್ ಭೇಟಿ ಬೆಳಗಾವಿ ರಾಜಕಾರಣ ವಿಷಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
ಈಗಾಗಲೇ ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಹಾಗೂ ಹಾಲಿ ಎಂಪಿಗಳ ಕಾರ್ಯವೈಖರಿ ಕುರಿತು ಬಿ.ಎಲ್ ಸಂತೋಷ್ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಸಂಸದರು ಕ್ಷೇತ್ರದಲ್ಲಿ ಯಾವ ಮಟ್ಟದಲ್ಲಿ ಜನಪರ ಭಾವನೆ ಹೊಂದಿದ್ದಾರೆ ಎಂದು ತಿಳಿಯುವ ನಿಟ್ಟಿನಲ್ಲಿ ಸಂತೋಷ್ ಕೆಲಸ ಪ್ರಾರಂಭಿಸಿದ್ದಾರೆ. ಈ ಬೆನ್ನಲ್ಲೇ ಗೋಕಾಕ್ ಸಾಹುಕಾರ್ ಭೇಟಿ ಮಾಡಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಕುರಿತು ಚರ್ಚೆ ನಡೆದಿರುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
ಕಳೆದ ವಿಧಾನಸಭಾ ಚುನಾವಣೆ ಸೋಲಿನ ನಂತರ ರಮೇಶ್ ಜಾರಕಿಹೊಳಿ ವಿರುದ್ಧ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಗುಂಪು ಹೈಕಮಾಂಡ್ ಬಳಿ ದೂರು ನೀಡಿದ್ದರು ಎಂದು ಹೇಳಲಾಗುತ್ತಿದ್ದು, ಸಧ್ಯ ಇದಕ್ಕೆ ಸಂಬಂಧಿಸಿದಂತೆ ಸಾಹುಕಾರ್ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿರಬಹುದು ಎಂದು ಹೇಳಲಾಗುತ್ತಿದೆ.
ಇನ್ನೂ ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡದಂತೆ ಪಕ್ಷದ ಕಾರ್ಯಕರ್ತರ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆಲ್ಲಲು ರಮೇಶ್ ಜಾರಕಿಹೊಳಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಲು ಬಿಜೆಪಿ ಹೈಕಮಾಂಡ್ ತೀರ್ಮಾಣಿಸಿದೆ ಎಂದು ಹೇಳಲಾಗುತ್ತಿದ್ದು, ಜಿಲ್ಲಾ ನಾಯಕತ್ವದ ಜವಾಬ್ದಾರಿ ಮತ್ತೊಮ್ಮೆ ಜಾರಕಿಹೊಳಿಗೆ ನೀಡಬಹುದು.


