ರಾಜ್ಯದ ಅತಿದೊಡ್ಡ ಬ್ಯಾಂಕ್ ದರೋಡೆ ಕೇಸ್ ಭೇದಿಸಿದ ಪೊಲೀಸರು
ವಿಜಯಪುರ : ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನ ಕಿಟಕಿ ಗ್ಲಾಸ್ ಒಡೆದು 53 ಕೋಟಿಯ ಹಣ ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕಣಕ್ಕೆ ಸಂಭಂಧಿಸಿದಂತೆ ಕಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಮೇ. 25 ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ದರೋಡೆ ನಡೆಸಲಾಗಿತ್ತು. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಲಾಕರ್ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ (58,976.94 ಗ್ರಾಂ.) ಬಂಗಾರದ ಆಭರಣಗಳು ಹಾಗೂ ನಗದು ಹಣ ರೂ. 5,20,450/-ಹೀಗೆ ಒಟ್ಟು 53,31,20,450/- ಕೋಟಿ ರೂ. ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು.
ಈ ಪ್ರಕರಣದಲ್ಲಿ ಹುಬ್ಬಳ್ಳಿಯ ಆರೋಪಿಗಳಾದ ಸೀನಿಯರ್ ಮ್ಯಾನೇಜರ್ ಕೆನರಾ ಬ್ಯಾಂಕ್ನ ವಿಜಯಕುಮಾರ ಮಿರಿಯಾಲ, ಹುಬ್ಬಳ್ಳಿ ಖಾಸಗಿ ಉದ್ಯೋಗಿ
ಚಂದ್ರಶೇಖರ ನೆರೆಲ್ಲಾ, ಸುನೀಲ ಮೋಕಾ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿತರು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೇ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಪ್ರಕರಣ ಭೇದಿಸಲಾಗಿದೆ ಎಂದು ಲಕ್ಷ್ಮಣ ನಿಂಬರಗಿ ಹೇಳಿದರು.
ಆರೋಪಿತರಿಂದ ಕೃತ್ಯಕ್ಕೆ ಬಳಸಿದ 02 ಕಾರುಗಳು ಹಾಗೂ ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10 ಕೋಟಿ 75 ಲಕ್ಷ ರೂ. ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಂಡು, ಇನ್ನುಳಿದ ಆರೋಪಿತರು ಹಾಗೂ ಕಳುವಾದ ವಸ್ತುಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು.


