ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಮತ್ತಿಬ್ಬರು ಬಿಜೆಪಿ ಶಾಸಕರ ಅಮಾನತು
ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಉಚ್ಚಾಟನೆ ನಂತರದಲ್ಲಿ ಬಿಜೆಪಿ ಹೈಕಮಾಂಡ್ ಇನ್ನಿಬ್ಬರು ಶಾಸಕರಿಗೆ ಬಿಗ್ ಶಾಕ್ ನೀಡಿದೆ.
2023 ರಲ್ಲಿ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಿಜೆಪಿ ಶಿಸ್ತು ಸಮೀತಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
ಕಳೆದ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹೊರಡಿಸಿದ್ದ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಗೆ ಮತ ನೀಡಿದ್ದರು. ಅಷ್ಟೇ ಅಲ್ಲದೇ ಪದೇ, ಪದೇ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಇವರನ್ನು ಅಮಾನತು ಮಾಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.
ಇನ್ನುಮುಂದೆ ಬಿಜೆಪಿ ಪಕ್ಷದ ಚಿನ್ಹೆ ಹಾಗೂ ನಾಯಕರ ಜೊತೆ ಈ ಇಬ್ಬರು ಶಾಸಕರು ಗುರುತಿಸಿಕೊಳ್ಳುವಂತಿಲ್ಲ. ಯತ್ನಾಳ್ ಬೆನ್ನಲ್ಲೇ ಮತ್ತಿಬ್ಬರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ.


